ಬೆಳಗಾವಿ : ಬಿಜೆಪಿ ನಾಯಕರ ಜೊತೆ ಆರ್ಎಸ್ಎಸ್ ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಮತ್ತೊಮ್ಮೆ ಗುಡುಗಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಎಂದು ಒಪ್ಪಿಲ್ಲ ಒಪ್ಪುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಸ್ವಪಕ್ಷೀಯ ನಾಯಕರ ವಿರುದ್ಧವೇ ಗುಡುಗಿದ್ದಾರೆ.

ಈ ಕುರಿತು ಅಥಣಿಯಲ್ಲಿ ಮಾತನಾಡಿದ ಅವರು, RSS ಸಭೆಯಲ್ಲಿ ಏನ್ ಚರ್ಚೆ ಆಯಿತು ಎಂದು ಹೇಳೋಕೆ ಬರಲ್ಲ. ಸಭೆಯಲ್ಲಿ ಯಾರು ಯಾರನ್ನು ಬೈದ್ರು ಅಂತಾನೂ ಹೇಳೋಕೆ ಬರಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ. ವಿಜಯೇಂದ್ರ ಅವರ ಅಧ್ಯಕ್ಷ ಸ್ಥಾನವನ್ನು ಎಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಪಕ್ಷದಲ್ಲಿ ಜೂನಿಯರ್, ಅವನಿಗೆ ಏನು ತಿಳುವಳಿಕೆ ಇಲ್ಲ ಎಂದು ಗುಡುಗಿದ್ದಾರೆ.
ಇದೇ ವೇಳೆ ಮಾತನಾಡಿ, ವಿಜಯೇಂದ್ರ ಭಾರತೀಯ ಜನತಾ ಪಕ್ಷದ ಭ್ರಷ್ಟ ಎಂಬ ಲೇಬಲ್ ಗೆ ಅಷ್ಟೇ ಸೀಮಿತವಾಗಿದ್ದಾರೆ. ಭಾರತಿ ಜನತಾ ಪಕ್ಷಕ್ಕೆ ಭ್ರಷ್ಟ ಅಂತ ಲೇಬಲ್ ಕೊಟ್ಟಿದ್ದೇ ವಿಜಯೇಂದ್ರ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ನಾನು ಯಡಿಯೂರಪ್ಪನವರಿಗೆ ಯಾವತ್ತೂ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕರಾಗಿದ್ದು, ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರು ಪ್ರಬಲ ನಾಯಕನಾಗಿಲ್ಲ. ಬಿಜೆಪಿಯ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ ಎಂದು ಹೇಳಿದ್ದಾರೆ.