ಕರ್ನಾಟಕ

ಚನ್ನಪಟ್ಟಣ ರಣಕಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಗುರುವಾರ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ರಾಮನಗರ: ಬೊಂಬೆನಗರಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿ, ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ಗುರುವಾರ ಸಿಪಿವೈ ನಾಮಪತ್ರ ಸಲ್ಲಿಕೆ: ಇಂದು ಬೆಳಗ್ಗೆ 11ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ರಾಮನಗರ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಹಾಗೂ ಸರ್ಕಾರದ ಇನ್ನೂ ಹಲವಾರು ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ರಾಜ್ಯ ಮಟ್ಟದ ಅನೇಕ ನಾಯಕರು, ಮಾಜಿ ಸಚಿವರು ಮಾಜಿ ಶಾಸಕರು ಭಾಗವಹಿಸುತ್ತಿದ್ದಾರೆ. ತಾಲೂಕು ಕಾಂಗ್ರೆಸ್ನ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಹಳೆ ಬೆಂಗಳೂರು ಮೈಸೂರು ಹೆದ್ದಾರಿಯ ಸ್ಪನ್ ಸೀಲ್ಕ್ ಮಿಲ್ನಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.