ಸರ್ಕಾರಿ ನೌಕರರ ಪ್ರಾತಿನಿಧಿಕ ಸಂಘವಾದ, ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣಾ ಕಣಕ್ಕಿಳಿದಿದೆ. 2024-29ನೇ ಅವಧಿಗೆ ಸರ್ಕಾರಿ ನೌಕರರ ಹಿತ ರಕ್ಷಣೆ ಮತ್ತು ಶ್ರೇಯೋಭಿವೃದ್ಧಿಗಾಗಿ ಪ್ರಜಾಸತ್ತಾತ್ಮಕ ನೌಕರರ ವೇದಿಕೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ಪಿ. ಕೃಷ್ಣೇಗೌಡ, ಹಾಗೂ ಖಜಾಂಚಿ ಹುದ್ದೆಗೆ ವಿ.ವಿ.ಶಿವರುದ್ರಯ್ಯ ಸ್ಪರ್ಧೆಗಿಳಿದಿದ್ದಾರೆ. ಸರ್ಕಾರಿ ನೌಕರರ ವೇತನ ತಾರತಮ್ಯ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು, ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿ ಕಣಕ್ಕಿಳಿದಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಪಿ. ಕೃಷ್ಣೇಗೌಡ, 2019 -24 ರ ಅವಧಿಯಲ್ಲಿದ್ದ ಸಂಘದ ಪದಾಧಿಕಾರಿಗಳು ಯಾವುದೇ ರಚನಾತ್ಮಕ ಸಾಧನೆ ಮಾಡಿಲ್ಲ. ಸರ್ಕಾರಿ ನೌಕರರ ಸಂಘಕ್ಕೆ ಹೊಸ ಚೈತನ್ಯ, ಹೊಸ ಆಯಾಮ ದೊರೆಕಿಸಿಕೊಡುವ ನಿಟ್ಟಿನಲ್ಲಿ ನಮ್ಮ ಬಣ ಕಾರ್ಯನಿರ್ವಹಿಸಲಿದೆ. ಸರ್ಕಾರಿ ನೌಕರರ ಬಗ್ಗೆ ದೂರದೃಷ್ಷಿ ಮತ್ತು ಕಾಳಜಿಯಿಂದ ಕಾರ್ಯನಿರ್ವಹಿಸುತ್ತೇವೆ. ಹಲವಾರು ವರ್ಷಗಳಿಂದ ಸರ್ಕಾರದ ಮುಂದಿರುವ ನೌಕರರ ಬೇಡಿಕೆಗಳನ್ನು ಈಡೇರಿಸಲು ಹಾಗೂ ಎಲ್ಲಾ ಸರ್ಕಾರಿ ನೌಕರರನ್ನು ಸಮಾನವಾಗಿ ಮುನ್ನಡೆಸುವುದು ನಮ್ಮ ಕಾರ್ಯಸೂಚಿಯ ಪ್ರಮುಖ ಅಂಶವಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರಿದ್ದು, 30 ಜಿಲ್ಲಾ ಶಾಖೆಗಳು, 186 ತಾಲೂಕು ಶಾಖೆಗಳು ಮತ್ತು 7 ಯೋಜನಾ ಶಾಖೆಗಳಲ್ಲಿ ನೌಕರರ ಸಂಘ ಕಾರ್ಯನಿರ್ವಹಿಸಲಿದೆ. 66 ಜಿಲ್ಲಾ ನಿರ್ದೇಶಕರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡುತ್ತಿದ್ದು, ತಾಲೂಕು ಶಾಖೆಗಳ ನಿರ್ದೇಶಕರು, ತಾಲೂಕು ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಈ ಎಲ್ಲಾ ಹಂತಗಳಲ್ಲೂ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಂದಿದ್ದಾರೆ.
ಸರ್ಕಾರಿ ನೌಕರರ ಸಂಘದ ಆಡಳಿತವನ್ನು ಸಶಕ್ತಗೊಳಿಸುವುದು ನಮ್ಮ ಗುರಿಯಾಗಿದೆ. ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳುತ್ತೇವೆ. ಸಂಘದ ಬೈಲಾ ಅನುಷ್ಠಾನ ನಮ್ಮ ಪ್ರಧಾನ ಆದ್ಯತೆಯಾಗಿದೆ. ಪೂರ್ಣ ಪ್ರಮಾಣದಲ್ಲಿ ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದು ನಮ್ಮ ಗುರಿಯಾಗಿದೆ. ಸರ್ಕಾರಿ ನೌಕರರಿಗೆ ಎನ್.ಪಿ.ಎಸ್ ರದ್ದುಗೊಳಿಸುವ ಭರವಸೆ ಈಡೇರಿಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಪಡೆಯುವುದು ನಮ್ಮ ಗುರಿಯಾಗಿದೆ. ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.